Skip to main content

Posts

Showing posts from 2025

ಧನ್ವಂತರಿಯ ಚಿಕಿತ್ಸೆ - ಕುವೆಂಪು

ಈ ಕಥೆಯು, ಪ್ರಕಸಂ ಅಭಿನಯಿಸಿದ ಕಥಾಸಂಗಮ ನಾಟಕಕ್ಕಾಗಿ ಆಯ್ದುಕೊಂಡಿದ್ದು. ನಾಟಕದ ಪೂರ್ಣ ವಿವರಕ್ಕಾಗಿ - www.prakasamtrust.org/ks  ನೋಡಿ. ಧನ್ವಂತರಿಯ ಚಿಕಿತ್ಸೆ   *ಕುವೆಂಪು   ಋಷಿ ವಿಶ್ವಾಮಿತ್ರನು ನಂದನವನದ ಒಂದು ಮೂಲೆಯಲ್ಲಿ , ಕಲ್ಪವೃಕ್ಷದಿಂದ ಸ್ವಲ್ಪ ದೂರವಾಗಿದ್ದು ಅನಾಮಧೇಯವಾಗಿದ್ದ ಮರವೊಂದರ ನೆರಳಿನಲ್ಲಿ ಹಿಂದಕ್ಕೂ ಮುಂದಕ್ಕೂ ಶತಪಥ ತಿರುಗುತ್ತಿದ್ದನು . ನಿಯತೇಂದ್ರಿಯನಾಗಿದ್ದರೂ ಕೂಡ ಬಯಸಿದೊಡನೆ ಬಯಕೆಗಳನ್ನೆಲ್ಲ ನೀಡುವಂತಹ ಮರದ ನೆರಳಿನಲ್ಲಿರುವುದು ಅಪಾಯಕರವೆಂದು ಅವನಿಗೆ ಅನುಭವದಿಂದ ಗೊತ್ತಾಗಿತ್ತು . ಮನಸ್ಸಿನಲ್ಲಿ ಮಿಂಚುವ ಭಾವಚಿಂತಾಪೇಕ್ಷೆಗಳೆಲ್ಲ - ಒಳ್ಳೆಯದು , ಕೆಟ್ಟದ್ದು , ಅನುಕೂಲವಾದದ್ದು , ಪ್ರತಿಕೂಲವಾದದ್ದು ವಾಸ್ತವವಾಗುವುದಾದರ ಗತಿ ? ರಾಜರ್ಷಿಯ ಪಟ್ಟದಿಂದ ಬ್ರಹ್ಮರ್ಷಿಯ ಪಟ್ಟಕ್ಕೆ ಏರಿದ್ದರೂ ಆತನು ತನ್ನ ಚಿತ್ತದ ಸಾತ್ವಿಕತೆಯ ವಿಷಯದಲ್ಲಿ ಅತಿ ವಿಶ್ವಾಸವಿಟ್ಟುಕೊಳ್ಳುವಷ್ಟು ಅಹಂಕಾರಿಯಾಗಿರಲಿಲ್ಲ .  ವಿಶ್ವಾಮಿತ್ರನ ಮನಸ್ಸು ಗಂಭೀರ ಚಿಂತಾಮಗ್ನವಾಗಿತ್ತು ; ಹಾಗೂ ಕಿಂಚಿದುದ್ವಿಗ್ನವಾಗಿತ್ತು . ದೂರದಲ್ಲಿ ಆಮೋದ ಪ್ರಮೋದಗಳಲ್ಲಿ ಅದ್ದಿ ಮರೆಯುತ್ತಿದ್ದ ದೇವವಿಲಾಸಿಗಳೂ ವಿಲಾಸಿನಿಯರೂ ಯಾವ ಕಾರಣಕ್ಕಾಗಿಯೋ ಗಹಗಹಿಸಿ ನಕ್ಕಾಗೊಮ್ಮೆ ಋಷಿ ತಲೆಯೆತ್ತಿ ನೋಡಿದನು . ಹುಬ್ಬುಗಂಟು ಹಾಕಿ , ತುಟಿ ಕಚ್ಚಿಕ...